ಬಿಟ್‌ಕಾಯಿನ್‌ ದಂಧೆ : ಶಾಸಕ ಎನ್.ಎ. ಹ್ಯಾರಿಸ್-ನಲಪಾಡ್‌ಗೆ ಇಡಿ ಶಾಕ್, ಬೆಂಗಳೂರಿನ 17 ಕಡೆಗಳಲ್ಲಿ ಬೆಳ್ಳಂಬೆಳಗ್ಗೆ ದಾಳಿ

ಬಹುಕೋಟಿ ಬಿಟ್‌ಕಾಯಿನ್ ಹಗರಣದ ಪ್ರಮುಖ ಆರೋಪಿ ಆಗಿರುವ ಹ್ಯಾಕರ್ ಶ್ರೀಕೃಷ್ಣ ಅಲಿಯಾಸ್ ಶ್ರೀಕಿ ಜೊತೆ ಮೊಹಮ್ಮದ್ ನಲಪಾಡ್ ಆರ್ಥಿಕ ವ್ಯವಹಾರ ನಡೆಸಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ಈ ದಾಳಿ ನಡೆದಿದೆ.

ಬೆಂಗಳೂರು : ಸಿಲಿಕಾನ್ ಸಿಟಿಯಲ್ಲಿಂದು ಬೆಳ್ಳಂಬೆಳಗ್ಗೆಯೇ ಜಾರಿ ನಿರ್ದೇಶನಾಲಯ (ED) ಭರ್ಜರಿ ಕಾರ್ಯಾಚರಣೆ ನಡೆಸಿದೆ. ಶಾಂತಿನಗರದ ಕಾಂಗ್ರೆಸ್ ಶಾಸಕ ಹಾಗೂ ಬಿಡಿಎ ಅಧ್ಯಕ್ಷ ಎನ್.ಎ. ಹ್ಯಾರಿಸ್ ಹಾಗೂ ಮಗ ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಮೊಹಮ್ಮದ್ ನಲಪಾಡ್ ಅವರಿಗೆ ಸಂಬಂಧಿಸಿದ ಒಟ್ಟು 17 ಸ್ಥಳಗಳಲ್ಲಿ ಇಡಿ ಅಧಿಕಾರಿಗಳು ಏಕಕಾಲಕ್ಕೆ ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ.

ಬಹುಕೋಟಿ ಬಿಟ್‌ಕಾಯಿನ್ ಹಗರಣದ ಪ್ರಮುಖ ಆರೋಪಿ ಆಗಿರುವ ಹ್ಯಾಕರ್ ಶ್ರೀಕೃಷ್ಣ ಅಲಿಯಾಸ್ ಶ್ರೀಕಿ ಜೊತೆ ಮೊಹಮ್ಮದ್ ನಲಪಾಡ್ ಆರ್ಥಿಕ ವ್ಯವಹಾರ ನಡೆಸಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ಈ ದಾಳಿ ನಡೆದಿದೆ.

ಇದನ್ನೂ ಓದಿ: ಕಾರ್ಪೋರೇಟ್​ ಜಿಹಾದ್​ ಪ್ರಕರಣ : ಟಿಸಿಎಸ್​ ಉದ್ಯೋಗಿಗಳಿಗೆ ವರ್ಕ್​ ಫ್ರಾಂ ಹೋಂ

ಶ್ರೀಕಿ ಮತ್ತು ನಲಪಾಡ್ ನಡುವೆ ಕಳೆದ 6 ವರ್ಷಗಳಿಂದ ಸುಮಾರು 4.5 ಕೋಟಿ ರೂಪಾಯಿಗಳ ಆರ್ಥಿಕ ವಹಿವಾಟು ನಡೆದಿದೆ ಎಂಬ ಅನುಮಾನದ ಹಿನ್ನೆಲೆಯಲ್ಲಿ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದು, ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ ಅಡಿಯಲ್ಲಿ ಪರಿಶೀಲನೆ ನಡೆಸುತ್ತಿದ್ದಾರೆ. ದಾಳಿಯ ವೇಳೆ ಹಲವು ಮಹತ್ವದ ದಾಖಲೆಗಳು ಮತ್ತು ಡಿಜಿಟಲ್ ಪುರಾವೆಗಳನ್ನು ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ ಎನ್ನಲಾಗಿದೆ.

ನಲಪಾಡ್‌ ಆಪ್ತರಿಗೆ ಆತಂಕ

ಅಶೋಕ್ ನಗರದಲ್ಲಿರುವ ಮೊಹಮ್ಮದ್ ನಲಪಾಡ್ ಅವರ ಮನೆ, ಶಾಂತಿನಗರ ಮತ್ತು ಬಿಡಿಎ ಕಚೇರಿಯ ಸುತ್ತಮುತ್ತಲಿನ ಪ್ರದೇಶ, ಹ್ಯಾರಿಸ್ ಕುಟುಂಬಕ್ಕೆ ಸೇರಿದ ಶಿಕ್ಷಣ ಸಂಸ್ಥೆ, ವ್ಯವಹಾರಿಕ ಕ್ಷೇತ್ರ ಅಷ್ಟೇ ಅಲ್ಲದೇ ನಲಪಾಡ್ ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿರುವ ಇಬ್ಬರು ಪ್ರಮುಖ ಉದ್ಯಮಿಗಳ ಮನೆಗಳ ಮೇಲೂ ದಾಳಿ ನಡೆದಿದೆ. ಸದ್ಯ ಬೆಂಗಳೂರಿನಲ್ಲಿ ಹಲವು ಕಡೆಗಳಲ್ಲಿ ದಾಳಿ ನಡೆದಿದ್ದು, ನಲಪಾಡ್‌ ಆಪ್ತ ವಲಯದಲ್ಲಿ ಗುರುತಿಸಿಕೊಂಡವರ ಮನೆಗಳ ಮೇಲೂ ದಾಳಿ ನಡೆಯುವ ಸಾಧ್ಯತೆಯಿದೆ.

ಈಗಾಗಲೇ ಎಸ್‌ಐಟಿ ವಿಚಾರಣೆ ಎದುರಿಸಿದ್ದ ನಲಪಾಡ್‌ಗೆ ಇದೀಗ ಕೇಂದ್ರ ತನಿಖಾ ಸಂಸ್ಥೆ ಇಡಿ ದಾಳಿ ಬಾರೀ ಸಂಕಷ್ಟವನ್ನು ತಂದೊಡ್ಡಿದೆ. ಇದು ರಾಜಕೀಯ ಪ್ರೇರಿತ ದಾಳಿ ಎಂದು ಕಾಂಗ್ರೆಸ್ ನಾಯಕರು ಆರೋಪಿಸುತ್ತಿದ್ದರೆ, ಭ್ರಷ್ಟಾಚಾರದ ವಿರುದ್ಧದ ಕ್ರಮ ಎಂದು ಬಿಜೆಪಿ ಸಮರ್ಥಿಸಿಕೊಳ್ಳುತ್ತಿದೆ.

Archana V. Bhat |ಅರ್ಚನಾ ವಿ. ಭಟ್

ಅರ್ಚನಾ ವಿ. ಭಟ್‌ ಮೂಲತಃ ಉತ್ತರ ಕನ್ನಡ ಜಿಲ್ಲೆಯ ಕುಮಟಾ ಮೂಲದವರು. ಕಳೆದ ಹಲವು ವರ್ಷಗಳಿಂದಲೂ ಪತ್ರಕರ್ತರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ನ್ಯೂಸ್‌ನೆಕ್ಸ್ಟ್‌ ಕನ್ನಡ ಸುದ್ದಿ ಸಂಸ್ಥೆಯಲ್ಲಿ ನಾಲ್ಕು ವರ್ಷಗಳಿಂದ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ವ್ಯವಹಾರ, ಆಟೋಮೊಬೈಲ್‌, ಟೆಕ್ನಾಲಜಿ, ಕ್ರೀಡೆ ಸುದ್ದಿ ವಿಭಾಗದಲ್ಲಿ ಕಂಟೆಂಟ್‌ ಕ್ರಿಯೆಟರ್‌ ಆಗಿದ್ದಾರೆ.. ನೈಜ, ಸತ್ಯ ಸುದ್ದಿಯನ್ನು ಪ್ರಕಟಿಸುತ್ತಿದ್ದಾರೆ.