ಗುಜರಾತ್ನ ಸುರೇಂದ್ರನಗರ ಜಿಲ್ಲೆಯಲ್ಲಿ ಗುರುವಾರ ನಡೆದ ರಸ್ತೆ ಅಪಘಾತ ಜನರನ್ನು ಬೆಚ್ಚಿಬೀಳಿಸಿದೆ. ಟ್ಯಾಂಕರ್ಗೆ ಡಿಕ್ಕಿ ಹೊಡೆದ ಖಾಸಗಿ ಬಸ್ ಬೆಂಕಿಗಾಹುತಿಯಾದ ಪರಿಣಾಮ ನಾಲ್ವರು ಪ್ರಯಾಣಿಕರು ದುರ್ಮರಣ ಹೊಂದಿದ್ದಾರೆ.
ಅಹಮದಾಬಾದ್ನಿಂದ ರಾಜ್ಕೋಟ್ಗೆ ತೆರಳುತ್ತಿದ್ದ ಬಸ್, ಹೆದ್ದಾರಿಯಲ್ಲಿ ಸಾಗುತ್ತಿದ್ದ ಡಾಂಬರು ತುಂಬಿದ ಟ್ಯಾಂಕರ್ಗೆ ಹಿಂದಿನಿಂದ ಡಿಕ್ಕಿ ಹೊಡೆದಿದೆ. ಟ್ಯಾಂಕರ್ನ ಟೈರ್ ಸ್ಫೋಟಗೊಂಡ ಪರಿಣಾಮ ಚಾಲಕ ನಿಯಂತ್ರಣ ಕಳೆದುಕೊಂಡಿದ್ದಾನೆ ಎಂದು ವರದಿಯಾಗಿದೆ.
ಡಿಕ್ಕಿಯ ನಂತರ ಡಾಂಬರು ಸೋರಿಕೆಯಾಗಿ ಬಸ್ಸಿನೊಳಗೆ ಬೆಂಕಿ ವೇಗವಾಗಿ ಹರಡಿದೆ. ಇದರಿಂದ ಹಲವರು ಗಾಬರಿಯಿಂದ ಬಸ್ಸಿನಿಂದ ಹೊರಗೆ ಜಿಗಿದಿದ್ದಾರೆ. ನಾಲ್ವರು ಪ್ರಯಾಣಿಕರು ಮಾತ್ರ ಬೆಂಕಿಯಲ್ಲೇ ಸಿಲುಕಿ ಸಜೀವ ದಹನಗೊಂಡಿದ್ದಾರೆ.
ಘಟನೆಯಲ್ಲಿ ಗಾಯಗೊಂಡ 10 ಮಂದಿಯನ್ನು ರಾಜ್ಕೋಟ್ ಸಿವಿಲ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಕೆಲವರ ಸ್ಥಿತಿ ಗಂಭೀರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.
ಸ್ಥಳೀಯರು ಮತ್ತು ಪ್ರತ್ಯಕ್ಷದರ್ಶಿಗಳು ಕಿಟಕಿಗಳನ್ನು ಒಡೆದು ಹಲವು ಜನರನ್ನು ರಕ್ಷಿಸಲು ಮುಂದಾದರು. ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸಲು ಹರಸಾಹಸ ಪಟ್ಟರು.
ದುರಂತದ ಬಳಿಕ ಹೆದ್ದಾರಿಯಲ್ಲಿ ವಾಹನ ಸಂಚಾರಕ್ಕೆ ಭಾರೀ ಅಡಚಣೆ ಉಂಟಾಗಿತ್ತು. ಪೊಲೀಸರು ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿ ತನಿಖೆ ಆರಂಭಿಸಿದ್ದಾರೆ.
