ಪದವೀಧರರಿಗೆ ಗುಡ್‌ನ್ಯೂಸ್‌! ಬಿಇಎಲ್‌ನಲ್ಲಿ ಪ್ರಾಜೆಕ್ಟ್‌ ಎಂಜಿನಿಯರ್‌ ಹುದ್ದೆಗೆ ಅರ್ಜಿ ಆಹ್ವಾನ

BEL Recruitment 2025: ಭಾರತ ದೇಶದ ಸಾರ್ವಜನಿಕ ವಲಯದ ಏರೋಸ್ಪೇಸ್‌ ಮತ್ತು ರಕ್ಷಣಾ ಎಲೆಕ್ಟ್ರಾನಿಕ್ಸ್ ಕಂಪನಿಯಾದ ಭಾರತ್‌ ಎಲೆಕ್ಟ್ರಾನಿಕ್‌ ಲಿಮಿಟೆಡ್‌ ಪ್ರಾಜೆಕ್ಟ್‌ ಎಂಜಿನಿಯರ್‌ ಹುದ್ದೆಗಳ ನೇಮಕಾತಿ ಪ್ರಕಟಣೆ ಹೊರಡಿಸಿದೆ.

ರಕ್ಷಣಾ ಸಚಿವಾಲಯದ ಅಧೀನದಲ್ಲಿರುವ ಬಿಇಎಲ್‌ ಖಾಲಿ ಇರುವ 52 ಪ್ರಾಜೆಕ್ಟ್‌ ಎಂಜಿನಿಯರ್‌ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳುತ್ತಿದೆ.

ಆಸಕ್ತ ಅರ್ಹ ಅಭ್ಯರ್ಥಿಗಳು ಬಿಇಎಲ್‌ನ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ನವೆಂಬರ್ 20, 2025 ಆಗಿದೆ.

ಅರ್ಜಿ ಸಲ್ಲಿಕೆಗೆ ಅಗತ್ಯವಿರುವ ಅರ್ಹತಾ ಮಾನದಂಡಗಳೇನು ಎಂಬುದನ್ನು ತಿಳಿಯೋಣ.

ಯಾರು ಅರ್ಜಿ ಸಲ್ಲಿಸಬಹುದು?

ಬಿಇಎಲ್‌ನ ಪ್ರಾಜೆಕ್ಟ್‌ ಎಂಜಿನಿಯರ್‌ ಹುದ್ದೆಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಯು ಭಾರತ ಸರ್ಕಾರದಿಂದ ಮಾನ್ಯತೆ ಪಡೆದ ಸಂಸ್ಥೆಯಿಂದ ಎಲೆಕ್ಟ್ರಾನಿಕ್ಸ್‌, ಮೆಕ್ಯಾನಿಕಲ್‌ ಅಥವಾ ಕಂಪ್ಯೂಟರ್‌ ಸೈನ್ಸ್‌ನಲ್ಲಿ ಬಿಇ, ಬಿಟೆಕ್‌ ಅಥವಾ ಬಿಎಸ್‌ಸಿ ಪದವಿ ಹೊಂದಿರಬೇಕು.

ವಯೋಮಿತಿ ಎಷ್ಟು?
ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು 32 ವರ್ಷಕ್ಕಿಂತ ಹೆಚ್ಚು ವಯಸ್ಸಿನವರಾಗಿರಬಾರದು. ಮೀಸಲು ವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ ವಯೋಮಿತಿಯಲ್ಲಿ ಸಡಿಲಿಕೆ ಲಭ್ಯವಿರುತ್ತದೆ.

ವೇತನ ಎಷ್ಟು?

ಈ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮೊದಲ ವರ್ಷ ಮಾಸಿಕ 40,000 ರೂ, ಎರಡನೇ ವರ್ಷ ಮಾಸಿಕ 45,000 ರೂ. ಮೂರನೇ ವರ್ಷ ಮಾಸಿಕ 50,000 ರೂ. ಹಾಗೂ ನಾಲ್ಕನೇ ವರ್ಷ ಮಾಸಿಕ 55,000 ರೂ. ವೇತನ ನೀಡಲಾಗುವುದು. ಇದರ ಜೊತೆಗೆ ಇತರ ಸೌಲಭ್ಯಗಳನ್ನು ಸಹ ನೀಡಲಾಗುವುದು.

ಬಿಇಎಲ್‌ ಪ್ರಾಜೆಕ್ಟ್‌ ಎಂಜಿನಿಯರ್‌ ಹುದ್ದೆಗಳ ನೇಮಕಾತಿ ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್ಕಿಸಿ.

ಅರ್ಜಿ ಶುಲ್ಕ ಎಷ್ಟು?

ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು 472 ರೂ. ಅರ್ಜಿ ಶುಲ್ಕ ಪಾವತಿಸಬೇಕು. ಆದರೆ ಎಸ್‌ಸಿ/ಎಸ್‌ಟಿ ಮತ್ತು ಅಂಗವಿಕಲ ಅಭ್ಯರ್ಥಿಗಳು ಅರ್ಜಿ ಶುಲ್ಕದಿಂದ ವಿನಾಯಿತಿ ಪಡೆದಿದ್ದಾರೆ. ಅರ್ಜಿ ಶುಲ್ಕ ಪಾವತಿಸದಿದ್ದರೆ ಅರ್ಜಿ ಸ್ವೀಕೃತವಾಗುವುದಿಲ್ಲ ಎಂಬುದನ್ನು ನೆನಪಿಡಿ.

ಯಾವೆಲ್ಲಾ ಪ್ರಮಾಣಪತ್ರಗಳು ಬೇಕು?

ಪ್ರಾಜೆಕ್ಟ್‌ ಎಂಜಿನಿಯರ್‌ ಹುದ್ದೆಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು 10 ನೇ ಮತ್ತು 12 ನೇ ತರಗತಿ ಪ್ರಮಾಣಪತ್ರ, ಪದವಿ ಪದವಿ, ಜಾತಿ ಪ್ರಮಾಣಪತ್ರ ಮತ್ತು ಪ್ರಕಟಣೆಯಲ್ಲಿ ನಿಗದಿಪಡಿಸಿದ ಇತರ ಅರ್ಹತೆಯನ್ನು ಹೊಂದಿರಬೇಕು.

ಇದನ್ನೂ ಓದಿ: ನಬಾರ್ಡ್ ನೇಮಕಾತಿ 2025: 92 ಹುದ್ದೆಗಳಿಗೆ ಇಂದೇ ಅರ್ಜಿ ಸಲ್ಲಿಸಿ

ಆಯ್ಕೆ ಪ್ರಕ್ರಿಯೆ ಹೇಗೆ ನಡೆಯುತ್ತದೆ?

ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಸಾಮಾನ್ಯ, ಒಬಿಸಿ ಮತ್ತು ಇಡಬ್ಲ್ಯೂಎಸ್ ಅಭ್ಯರ್ಥಿಗಳು ಲಿಖಿತ ಪರೀಕ್ಷೆ ಮತ್ತು ಸಂದರ್ಶನದಲ್ಲಿ ಕನಿಷ್ಠ 35 ಪ್ರತಿಶತ ಅಂಕಗಳನ್ನು ಪಡೆಯಬೇಕು.

ಎಸ್‌ಸಿ, ಎಸ್‌ಟಿ ಮತ್ತು ಅಂಗವಿಕಲ ಅಭ್ಯರ್ಥಿಗಳು ಲಿಖಿತ ಪರೀಕ್ಷೆ ಮತ್ತು ಸಂದರ್ಶನದಲ್ಲಿ ಕನಿಷ್ಠ 30 ಪ್ರತಿಶತ ಅಂಕಗಳನ್ನು ಪಡೆಯಬೇಕು.

Archana V. Bhat |ಅರ್ಚನಾ ವಿ. ಭಟ್

ಅರ್ಚನಾ ವಿ. ಭಟ್‌ ಮೂಲತಃ ಉತ್ತರ ಕನ್ನಡ ಜಿಲ್ಲೆಯ ಕುಮಟಾ ಮೂಲದವರು. ಕಳೆದ ಹಲವು ವರ್ಷಗಳಿಂದಲೂ ಪತ್ರಕರ್ತರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ನ್ಯೂಸ್‌ನೆಕ್ಸ್ಟ್‌ ಕನ್ನಡ ಸುದ್ದಿ ಸಂಸ್ಥೆಯಲ್ಲಿ ನಾಲ್ಕು ವರ್ಷಗಳಿಂದ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ವ್ಯವಹಾರ, ಆಟೋಮೊಬೈಲ್‌, ಟೆಕ್ನಾಲಜಿ, ಕ್ರೀಡೆ ಸುದ್ದಿ ವಿಭಾಗದಲ್ಲಿ ಕಂಟೆಂಟ್‌ ಕ್ರಿಯೆಟರ್‌ ಆಗಿದ್ದಾರೆ.. ನೈಜ, ಸತ್ಯ ಸುದ್ದಿಯನ್ನು ಪ್ರಕಟಿಸುತ್ತಿದ್ದಾರೆ.