ರಾಜ್ಯದಲ್ಲಿ ಮಳೆ ಅಬ್ಬರ ಸಾಧ್ಯತೆ! ಮುಂದಿನ ಎರಡು ದಿನ ಮಳೆಯ ಮುನ್ಸೂಚನೆ

ಬೆಂಗಳೂರು ಸೇರಿದಂತೆ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಬಿರುಗಾಳಿ ಮುನ್ಸೂಚನೆ ಹಿನ್ನೆಲೆ ಜನರಿಗೆ ಎಚ್ಚರಿಕೆ ನೀಡಲಾಗಿದೆ.

ಕರ್ನಾಟಕದ ಹಲವೆಡೆ ಇಂದು ಮಳೆಯ ವಾತಾವರಣ ಮುಂದುವರಿಯಲಿದ್ದು, ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ವಿಶೇಷವಾಗಿ ದಕ್ಷಿಣ ಒಳನಾಡು ಮತ್ತು ಕರಾವಳಿ ಭಾಗಗಳಲ್ಲಿ ಮಳೆ ಅಬ್ಬರ ಹೆಚ್ಚಾಗುವ ಸಾಧ್ಯತೆ ಇದೆ.

ಬೆಂಗಳೂರು ನಗರದಲ್ಲಿ ಮುಂದಿನ ಎರಡು ದಿನಗಳ ಕಾಲ ಸಂಜೆ ಮತ್ತು ರಾತ್ರಿ ವೇಳೆಯಲ್ಲಿ ಮಳೆಯಾಗುವ ಲಕ್ಷಣಗಳಿವೆ. ಕೆಲವೆಡೆ ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಜಾಗ್ರತೆ ವಹಿಸುವಂತೆ ಸೂಚಿಸಲಾಗಿದೆ. ಕಳೆದ ಕೆಲವು ದಿನಗಳಿಂದ ಬಿಸಿಲಿನ ತಾಪಮಾನ ಹೆಚ್ಚಾಗಿದ್ದ ಹಿನ್ನೆಲೆ ಮಳೆಯ ನಿರೀಕ್ಷೆಯಲ್ಲಿ ಜನರು ಕಾಯುತ್ತಿದ್ದಾರೆ.

ಶಿವಮೊಗ್ಗ, ಕೊಡಗು, ಚಿಕ್ಕಮಗಳೂರು, ಹಾಸನ, ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗುವ ಮುನ್ಸೂಚನೆ ಇದೆ. ಈ ಭಾಗಗಳಲ್ಲಿ ಕೆಲವೆಡೆ ಧಾರಾಕಾರ ಮಳೆಯೂ ಸುರಿಯುವ ಸಾಧ್ಯತೆ ಇರುವುದಾಗಿ ಇಲಾಖೆ ಹೇಳಿದೆ. ಹೀಗಾಗಿ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲು ಸೂಚಿಸಿದೆ.

ಕರಾವಳಿ ಭಾಗದ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಗಂಟೆಗೆ 30ರಿಂದ 40 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ. ಈ ಪ್ರದೇಶಗಳಲ್ಲಿ ಗುಡುಗು ಸಹಿತ ಮಳೆಯಾಗಲಿದ್ದು, ಮೀನುಗಾರರು ಹಾಗೂ ಸಮುದ್ರ ತೀರ ಪ್ರದೇಶದ ಜನರು ಎಚ್ಚರಿಕೆಯಿಂದ ಇರಲು ಸೂಚಿಸಲಾಗಿದೆ.

ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ ಮತ್ತು ಹಾವೇರಿ ಜಿಲ್ಲೆಗಳಲ್ಲೂ ಬಿರುಗಾಳಿ ಸಹಿತ ಮಳೆಯಾಗಲಿದೆ. ಕೆಲವೆಡೆ ಗಾಳಿಯ ವೇಗ ಗಂಟೆಗೆ 50 ಕಿ.ಮೀ ತಲುಪುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ದಕ್ಷಿಣ ಕನ್ನಡ ಸೇರಿದಂತೆ ಕೆಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಮೇ 9 ಮತ್ತು 10ರಂದು ಕೆಲ ಪ್ರದೇಶಗಳಲ್ಲಿ 64.5 ಮಿ.ಮೀ ರಿಂದ 115.5 ಮಿ.ಮೀ ವರೆಗೆ ಮಳೆಯಾಗುವ ಸಾಧ್ಯತೆ ಇರುವುದರಿಂದ ಜನರು ಅಗತ್ಯ ಮುನ್ನೆಚ್ಚರಿಕೆ ವಹಿಸಬೇಕು ಎಂದು ಅಧಿಕಾರಿಗಳು ಮನವಿ ಮಾಡಿದ್ದಾರೆ.

Exit mobile version